ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ನಿರ್ಬಂಧ
ಚುಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದ್ದು, ಶೃಂಗೇರಿ ಠಾಣಾ ವ್ಯಾಪ್ತಿಯ ಸುಂಕದಮಕ್ಕಿ ನೆಮ್ಮಾರು ಸಮೀಪ ಸುರಿಯುತ್ತಿರುವ ಬಾರಿ ಮಳೆಯ ಕಾರಣ ಗುಡ್ಡ ಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ ಮೇಲೆ ನಿರಂತರವಾಗಿ ಮಣ್ಣು ಜರುಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಕೆರೆಕಟ್ಟೆ, ಎಸ್ ಕೆ ಬಾರ್ಡರ್ ಮೂಲಕ ಉಡುಪಿ ಮಂಗಳೂರು ಕಡೆ ಸಾಗುವ ವಾಹನಗಳ ಸಂಚಾರವನ್ನು ಇಂದು ಸಂಜೆ 5.30 ರಿಂದ ಬೆಳಿಗ್ಗೆ 8 ಗಂಟೆಯವರೆಗೆ ರಾಷ್ಟ್ರೀಯ ಹೆದ್ದಾರಿ NH-169 ನಲ್ಲಿ ವಾಹನ ಸಂಚಾರವನ್ನು ತತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಶೃಂಗೇರಿಯಿಂದ ಉಡುಪಿ, ಮಂಗಳೂರು ಕಡೆ ಸಾಗುವ ವಾಹನಗಳಿಗೆ ಬದಲಿ ಮಾರ್ಗವನ್ನು ವ್ಯವಸ್ಥೆ ಮಾಡಲಾಗಿದ್ದು, ಬಿದರಗೋಡು ಆಗುಂಬೆ ಮಾರ್ಗವಾಗಿ ಸಂಚರಿಸಲು ಅನುವು ಮಾಡಿಕೊಡಲಾಗಿದೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಹಯೋಗದಲ್ಲಿ ಮಣ್ಣು ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದ್ದು ಪೂರ್ಣಗೊಂಡ ನಂತರ ವಾಹನ ಸಂಚಾರಕ್ಕೆ ರಾಷ್ಟ್ರೀಯ ಹೆದ್ದಾರಿ ರಸ್ತೆಯನ್ನು ಮುಕ್ತ ಗೊಳಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

